ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಆಯ್ದಕ್ಕಿ ಮಾರಯ್ಯ

ವಿಕಿಸೋರ್ಸ್ದಿಂದ

೧೨ನೆಯ ಶತಮಾನದಲ್ಲಿ ಬಸವಣ್ಣನವರ ಸಮಕಾಲೀನನಾಗಿ ಕಲ್ಯಾಣದಲ್ಲಿದ್ದ ಒಬ್ಬ ಶರಣ. ಅನುಭವ ಮಂಟಪದ ಅನುಭಾವಿಗಳಲ್ಲಿ ಒಬ್ಬ. ಬಸವಣ್ಣನವರ ಮಹಾಮನೆಯ ಮುಂದೆ ಚೆಲ್ಲಿದ ಅಕ್ಕಿಯನ್ನು ಆಯುವುದು ಆತನ ಕಾಯಕ. ಆದುದರಿಂದಲೇ ಆಯ್ದಕ್ಕಿ ಮಾರಯ್ಯನೆಂದು ಪ್ರಸಿದ್ಧನಾಗಿದ್ದಾನೆ. ಒಮ್ಮೆ ಅನುಭವ ಮಂಟಪದಲ್ಲಿ ಕಾಯಕವನ್ನು ಕುರಿತು ಆತ ಎತ್ತಿದ ಸಂದೇಹವನ್ನೂ ಅದಕ್ಕೆ ಅಲ್ಲಮಪ್ರಭು ಕೊಟ್ಟ ಉತ್ತರವನ್ನೂ ಶೂನ್ಯ ಸಂಪಾದನೆ ಬಹಳ ಅರ್ಥವತ್ತಾಗಿ ಚಿತ್ರಿಸಿದೆ: ಕಾಯಕದಲ್ಲಿ ನಿರತನಾದರೆ ಗುರುದರ್ಶನವಾದರೂ ಮರೆಯಬೇಕು; ಲಿಂಗಪುಜೆಯಾದರೂ ಮರೆಯಬೇಕು; ಜಂಗಮ ಮುಂದಿದ್ದರೂ ಹಂಗು ಹರಿಯಬೇಕು. ಕಾಯಕವೇ ಕೈಲಾಸವಾದ ಕಾರಣ ಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು. ಅವನ ಈ ಮಾತು ಕಾಯಕನಿಷ್ಠೆಯನ್ನು ತೋರಿಸುತ್ತದೆ. ನಿಜ ಆದರೆ ಅಲ್ಲಿ ಇನ್ನೊಂದು ಧ್ವನಿಯಿದೆ. ಕಾಯಕವೇ ಕೈಲಾಸವಾದುದರಿಂದ ಗುರು ಲಿಂಗ ಜಂಗಮ ಈ ತ್ರಿವಿಧದಾಸೋಹದ ಹಂಗಾದರೂ ಏತಕ್ಕೆ ಎಂಬ ಪ್ರಶ್ನೆಗೆ ಅಲ್ಲಮ ಸರಿಯಾದ ಉತ್ತರ ಕೊಡುತ್ತಾನೆ. ಹೊಟ್ಟೆಪಾಡಿನ ಉದ್ಯೋಗ ಕಾಯಕವಾಗಬೇಕಾದರೆ ತ್ರಿವಿಧದಾಸೋಹ ದಿಂದ ಮಾತ್ರ ಸಾಧ್ಯ. ಮಾಡುವ ಮಾಟದಿಂದವೆ ಬೇರೊಂದನರಿಯಬೇಕು; ಅರಿವಿಂಗೆ ನೆಮ್ಮುಗೆ ಒಡಗೂಡಬೇಕು. ಇದಕ್ಕೆ ತ್ರಿವಿಧದಾಸೋಹವೇ ಸಾಧನವೆಂದು ಅಲ್ಲಮಪ್ರಭು ಕಾಯಕದ ರಹಸ್ಯವನ್ನು ಬಿತ್ತರಿಸುವುದಕ್ಕೆ ಈತನೆತ್ತಿದ ಸಂದೇಹ ನೆಪಮಾತ್ರವಾಗುತ್ತದೆ. ವಾಸ್ತವವಾಗಿ ಕಾಯಕದ ಪುರ್ಣಸ್ವರೂಪವನ್ನು ನಿತ್ಯಜೀವನದ ಆಚರಣೆಯಲ್ಲಿ ಸಾಧಿಸಿ ತೋರಿಸುತ್ತಿದ್ದವ ಮಾರಯ್ಯ. ಆತನ ಪತ್ನಿ ಲಕ್ಕಮ್ಮನಂತೂ ಕಾಯಕನಿಷ್ಠೆಯೇ ಮೈವೆತ್ತ ಮೂರ್ತಿ. ಒಮ್ಮೆ ಮಾರಯ್ಯ ಅಗತ್ಯವಾದುದಕ್ಕಿಂತ ಹೆಚ್ಚಿನ ಅಕ್ಕಿಯನ್ನು ಆಯ್ದು ತಂದಾಗ ಈ ಅಕ್ಕಿಯ ಆಶೆ ನಿಮಗೇಕೆ, ಈಶ್ವರನೊಪ್ಪ ಎಂದು ಹೆಚ್ಚಾದ ಅಕ್ಕಿಯನ್ನು ಮತ್ತೆ ಹಿಂದಕ್ಕೆ ಸುರಿಸಿದ ದಿಟ್ಟತನ ಆಕೆಯದು. ಅಂದಂದಿನ ಕಾಯಕವನ್ನು ಅಂದಂದು ಮಾಡಿ ಶುದ್ಧರಾಗಬೇಕು ಎಂಬ ನಿಸ್ಪೃಹ ನಿಷ್ಠೆಯಿಂದ ತಮ್ಮ ಸಾಧನೆಯ ಫಲವನ್ನು ಲೋಕಕ್ಕೆ ವಿನಿಯೋಗಿಸಿದ ಈ ದಂಪತಿಗಳು ವಚನಕಾರರೂ ಹೌದು. ಅಮರೇಶ್ವರ ಲಿಂಗ ಎಂಬ ಅಂಕಿತದಿಂದ ಮಾರಯ್ಯ ವಚನಗಳನ್ನು ಬರೆದು ಶರಣರಲ್ಲಿ ಒಂದು ಪ್ರಮುಖ ಸ್ಥಾನವನ್ನು ಪಡೆದಿದ್ದಾನೆ.